ಕಾಲೇಜು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯಕ್ಕೆ ಒತ್ತು: ಹೇಮಂತ್ ಎನ್
ಶಿವಮೊಗ್ಗ,ಫೆ 13: ಇತ್ತೀಚಿನ ದಿನಗಳಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ವೈಯಕ್ತಿಕ ಸಮಸ್ಯೆಗಳಿಗೆ ಹಲವಾರು ಕಾರಣಗಳಿದ್ದು ಅವರ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ತಿಳಿಸಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ನಿಮ್ಹಾನ್ಸ್ ಬೆಂಗಳೂರು, ಪ್ರಾದೇಶಿಕ ಜಂಟಿ ನಿರ್ದೇಶಕರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಮತ್ತು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪದವಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಮನಸ್ಸಿನ ಆರೋಗ್ಯ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು,
ಇತ್ತೀಚಿನ ದಿನಗಳಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ವೈಯಕ್ತಿಕ ಸಮಸ್ಯೆಗಳಿಗೆ ಕಾರಣ ಸಾಮಾಜಿಕ ಸಂಬಂಧಗಳು, ದುಶ್ಚಟಗಳು ಸೇರಿದಂತೆ ಹಲವಾರಿವೆ. ಆತ್ಮಹತ್ಯೆ ಪ್ರಕರಣಗಳು ಸಹ ಹೆಚ್ಚಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯ ಕುರಿತಾದ ಈ ರೀತಿಯ ಕಾರ್ಯಾಗಾರಗಳು ಅತಿ ಅವಶ್ಯಕವಾಗಿದೆ ಎಂದರು.
ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಾದ ನಿಖಿಲ್ ಬಿ ಮಾತನಾಡಿ, ಇತ್ತೀಚೆಗೆ ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಮಾನಸಿಕ ಆರೋಗ್ಯದ ಬಗ್ಗೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಸಮಗ್ರ ಮಾಹಿತಿ ನೀಡುವ ಹಾಗೂ ದುಶ್ಚಟಗಳಿಗೆ ಕಡಿವಾಣ ಹಾಕುವಂತಹ ಇಂತಹ ಕಾರ್ಯಾಗಾರಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ನಟರಾಜ್ ಮಾತನಾಡಿ, ಜಿಲ್ಲೆಯ ಆಯ್ದ ಕಾಲೇಜುಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು, ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳಿಗೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು ತರಬೇತಿ ಪಡೆದ ಪ್ರಾಂಶುಪಾಲರು, ಪ್ರಾಧ್ಯಾಪಕರು ತಮ್ಮ ಕಾಲೇಜುಗಳಲ್ಲಿನ ಪದವಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಟಾಧಿಕಾರಿಯಾದ ಡಾ.ಕಿರಣ್ ಮಾತನಾಡಿ, ರಾಜ್ಯದಲ್ಲಿ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಇಂತಹ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಮನಸ್ಸಿನ ಆರೋಗ್ಯ ವೃದ್ಧಿಸುವ ನಿಟ್ಟಿನಲ್ಲಿ ಇದೊಂದು ಅತ್ಯುತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳಿಗೆ ಮನೋಬಲ ನೀಡಿ, ಅವರ ವ್ಯಕ್ತಿತ್ವ ವಿಕಸನದೊಂದಿಗೆ ಕುಟುಂಬಕ್ಕೆ ಉತ್ತಮ ವ್ಯಕ್ತಿ ಮತ್ತು ಸಮಾಜಕ್ಕೆ ಉತ್ತಮ ಪ್ರಜೆಗಳನ್ನಾಗಿ ನೀಡಬೇಕೆಂಬ ಉದ್ದೇಶದಿಂದ ಈ ವಿನೂತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ , ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾನಸಿಕ ಆರೋಗ್ಯದ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ , ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾನಸಿಕ ಆರೋಗ್ಯದ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ರಾಮ್ಪ್ರಸಾದ್,ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಚಂದ್ರಶೇಖರ್, ಅಶೋಕ್, ನವೀದ್ ಖಾನ್, ಅನಿಕೇತ್, ಶ್ರೀನಿವಾಸ್, ಸಚಿನ್ ಮುಂತಾದವರು ಉಪಸ್ಥಿತರಿದ್ದರು.

